ರಾಯಚೂರು ಗ್ರಾಮೀಣ, ಬಿಜೆಪಿಗಿಲ್ಲಿ ಸುಲಭವಿಲ್ಲ

2008ರಲ್ಲಿ ಕ್ಷೇತ್ರ ಪುನರ್ವಿಂಗಡಣೆ ಬಳಿಕ ಕಲ್ಮಲಾ ಕ್ಷೇತ್ರ ರದ್ದಾಗಿ ಅಸ್ತಿತ್ವಕ್ಕೆ ಬಂದ ರಾಯಚೂರು ಗ್ರಾಮೀಣ ಸಂಪೂರ್ಣ ಹಳ್ಳಿಗಳನ್ನೇ ಹೊಂದಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಉತ್ತಮ ನೆಲೆ ಹೊಂದಿವೆ. ಆದರೆ, ಜೆಡಿಎಸ್ ಪಕ್ಷಕ್ಕೆ ಇಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. 2008 ಹಾಗೂ 2018, 2023 ರಲ್ಲಿ ಕಾಂಗ್ರೆಸ್ ಮತ್ತು 2013 ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದಾರೆ. 2008 ಹಾಗೂ 2013ರಲ್ಲಿ ರಾಜಾ ರಾಯಪ್ಪ ನಾಯಕ ಅವರನ್ನು ಕಣಕ್ಕಿಳಿಸಿದ್ದ ಕಾಂಗ್ರೆಸ್ 2018 ಹಾಗೂ 2023 ರಲ್ಲಿ ಬಸನಗೌಡ ದದ್ದಲ್ ಅವರಿಗೆ ಟಿಕೆಟ್ ನೀಡಿದೆ. ಬಸನಗೌಡ ದದ್ದಲ್ 2008, 2013 ಹಾಗೂ 2018 ರ ಚುನಾವಣೆಯಲ್ಲಿ ಮೂರು ಪ್ರತ್ಯೇಕ ಪಕ್ಷಗಳಿಂದ ಸ್ಪರ್ಧಿಸಿದ್ದರು. 2008 ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿದ್ದ ದದ್ದಲ್ 2013 ರಲ್ಲಿ ಮಾನ್ವಿ ಕ್ಷೇತ್ರದಲ್ಲಿ ಬಿ.ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಹೀನಾಯವಾಗಿ ಸೋತಿದ್ದರು. 2018 ರ ಚುನಾವಣೆಯಲ್ಲಿ ಮತ್ತೆ ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಮೊದಲ ಬಾರಿ ಶಾಸಕರಾಗಿದ್ದರು. ಕ್ಷೇತ್ರದ ಮೊದಲ ಶಾಸಕ,  ಲಿಂಗಸ್ಗೂರು ತಾಲೂಕು ಗುಂತಗೋಳ ಸಂಸ್ಥಾನದ ರಾಜಾ ರಾಯಪ್ಪ ನಾಯಕ ಪ್ರಸ್ತುತ ಚುನಾವಣಾ ರಾಜಕೀಯದಲ್ಲಿ ಸಕ್ರಿಯವಾಗಿಲ್ಲ. ಇನ್ನು 2013ರಲ್ಲಿ ಬಿಜೆಪಿಯಿಂದ ಗೆದ್ದಿದ್ದ ತಿಪ್ಪರಾಜು ಹವಾಲ್ದಾರ್ ಮೂಲತಃ ಶಿಕ್ಷಕರಾಗಿದ್ದು ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಆಪ್ತ ಸಹಾಯಕರಾಗಿ, ರಾಜಕೀಯ ಪಟ್ಟುಗಳನ್ನು ಕರಗತ ಮಾಡಿಕೊಂಡಿದ್ದರು. ಈ ಮೂಲಕ ಸ್ಪರ್ಧಿಸಿದ್ದ ಮೊದಲ ಚುನಾವಣೆಯಲ್ಲೇ ವಿಧಾನಸಭೆ ಪ್ರವೇಶಿಸಿದ್ದರು. 2018, 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ದದ್ದಲ್ ವಿರುದ್ಧ ಪರಾಭವಗೊಂಡಿದ್ದಾರೆ. ಬಸನಗೌಡ ದದ್ದಲ್ ಸಂಭಾವಿತ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದು ಎರಡನೇ ಬಾರಿ ಶಾಸಕರಾಗಿದ್ದಾರೆ. ಬಿಜೆಪಿಯಲ್ಲಿದ್ದ ಬಸನಗೌಡ ದದ್ದಲ್ ಆ ಬಳಿಕ ಬಿ.ಶ್ರೀರಾಮುಲು ಸ್ಥಾಪಿಸಿದ್ದ ಬಿ.ಎಸ್.ಆರ್. ಕಾಂಗ್ರೆಸ್  ಸೇರ್ಪಡೆಯಾಗಿದ್ದರು. ಆದರೆ, ಕಾಂಗ್ರೆಸ್ ಮಾತ್ರ ಬಸನಗೌಡ ದದ್ದಲ್ ಅವರಿಗೆ ಅದೃಷ್ಟದ ಪಕ್ಷವಾಗಿದೆ.