ಸಿಎಂ ಕೊಟ್ಟ ಮಾತಿನಂತೆ ನಡೆಯಲಿದ್ದಾರೆ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಧಾನವಾಗಿಯಾದರೂ ಕೊಟ್ಟ ಮಾತಿನಂತೆ ನಡೆಯುತ್ತಾರೆ ಎನ್ನುವ ಭರವಸೆ ಇಂದಿಗೂ ಇದೆ. ಡಾ.ಯತೀಂದ್ರ ಸಿದ್ದ ರಾಮಯ್ಯ ಅವರ ಮಾತೇ ನಮಗೆ ವೇದ ವಾಕ್ಯ. ಅವರೇ ಹೈಕಮಾಂಡ್ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಯತೀಂದ್ರ ಅವರ ಹೇಳಿಕೆ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೇ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರಷ್ಟು ತಿಳಿವಳಿಕೆ ನಮಗಿಲ್ಲ ಎಂದು ವ್ಯಂಗ್ಯವಾಡಿದರು.

ರಾಷ್ಟ್ರಗೀತೆಗೂ ಮುನ್ನ ಇನ್ನು ವಂದೇ ಮಾತರಂ ಹಾಡುವುದು ಕಡ್ಡಾಯ

ನವದೆಹಲಿ: ಬಂಕಿಂಚಂದ್ರ ಚಟೋಪಾಧ್ಯಾಯ ಬರೆದಿರುವ ವಂದೇ ಮಾತರಂ ಗೀತೆಗೆ 150 ವರ್ಷವಾಗಿರುವ ಹಿನ್ನೆಲೆಯಲ್ಲಿ ಈ ಗೀತೆ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ನಿಯಮಗಳನ್ನು ಬಿಡುಗಡೆ ಮಾಡಿದೆ. ಅದರನ್ವಯ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳುಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರಗೀತೆ ಜನ ಗಣ ಮನಕ್ಕೂ ಮೊದಲು ವಂದೇ ಮಾತರಂ ಗೀತೆಯನ್ನು ಕಡ್ಡಾಯವಾಗಿ ಹಾಡಬೇಕು. ಮೊದಲಿನ 2 ಚರಣದ ಬದಲು 3 ನಿಮಿಷ 10 ಸೆಕೆಂಡ್ ಅವಧಿ ಹೊಂದಿರುವ ಪೂರ್ತಿ (ಎಲ್ಲ 6 ಚರಣ) ಹಾಡಬೇಕು ಅಥವಾ ನುಡಿಸಬೇಕು’ ಎಂದು ಸೂಚಿಸಿದೆ.

‘ಸರ್ಕಾರದ ಪ್ರಶಸ್ತಿ ಪ್ರದಾನ ಸೇರಿದಂತೆ ರಾಷ್ಟ್ರಪತಿಗಳು ಭಾಗಿಯಾಗುವ ಎಲ್ಲಾ ಸಮಾರಂಭಗಳಲ್ಲಿ ಅವರ ಆಗಮನ ಮತ್ತು ನಿರ್ಗಮನದ ವೇಳೆ ವಂದೇ ಮಾತರಂ ಮೊಳಗಬೇಕು. ಶಾಲೆ ಕಾಲೇಜುಗಳಲ್ಲೂ ಪ್ರಾರ್ಥನೆ ವೇಳೆ ಗೀತೆ ಹಾಡಬೇಕು. ಈ ವೇಳೆ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು’ ಎಂದು ಹೊಸ ನಿಯಮಾವಳಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೆ, ಚಿತ್ರಮಂದಿರಗಳಲ್ಲಿ ಪ್ರಸಾರ ಆಗುವ ಸಾಕ್ಷ್ಯಚಿತ್ರ ಅಥವಾ ಸಿನಿಮಾಗಳ ಮಧ್ಯೆ ಈ ಗೀತೆ ಪ್ರಸಾರವಾದರೆ ಪ್ರೇಕ್ಷಕರು ಎದ್ದುನಿಲ್ಲುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.