ರಾಷ್ಟ್ರಗೀತೆಗೂ ಮುನ್ನ ಇನ್ನು ವಂದೇ ಮಾತರಂ ಹಾಡುವುದು ಕಡ್ಡಾಯ

ನವದೆಹಲಿ: ಬಂಕಿಂಚಂದ್ರ ಚಟೋಪಾಧ್ಯಾಯ ಬರೆದಿರುವ ವಂದೇ ಮಾತರಂ ಗೀತೆಗೆ 150 ವರ್ಷವಾಗಿರುವ ಹಿನ್ನೆಲೆಯಲ್ಲಿ ಈ ಗೀತೆ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ನಿಯಮಗಳನ್ನು ಬಿಡುಗಡೆ ಮಾಡಿದೆ. ಅದರನ್ವಯ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳುಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರಗೀತೆ ಜನ ಗಣ ಮನಕ್ಕೂ ಮೊದಲು ವಂದೇ ಮಾತರಂ ಗೀತೆಯನ್ನು ಕಡ್ಡಾಯವಾಗಿ ಹಾಡಬೇಕು. ಮೊದಲಿನ 2 ಚರಣದ ಬದಲು 3 ನಿಮಿಷ 10 ಸೆಕೆಂಡ್ ಅವಧಿ ಹೊಂದಿರುವ ಪೂರ್ತಿ (ಎಲ್ಲ 6 ಚರಣ) ಹಾಡಬೇಕು ಅಥವಾ ನುಡಿಸಬೇಕು’ ಎಂದು ಸೂಚಿಸಿದೆ.

‘ಸರ್ಕಾರದ ಪ್ರಶಸ್ತಿ ಪ್ರದಾನ ಸೇರಿದಂತೆ ರಾಷ್ಟ್ರಪತಿಗಳು ಭಾಗಿಯಾಗುವ ಎಲ್ಲಾ ಸಮಾರಂಭಗಳಲ್ಲಿ ಅವರ ಆಗಮನ ಮತ್ತು ನಿರ್ಗಮನದ ವೇಳೆ ವಂದೇ ಮಾತರಂ ಮೊಳಗಬೇಕು. ಶಾಲೆ ಕಾಲೇಜುಗಳಲ್ಲೂ ಪ್ರಾರ್ಥನೆ ವೇಳೆ ಗೀತೆ ಹಾಡಬೇಕು. ಈ ವೇಳೆ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು’ ಎಂದು ಹೊಸ ನಿಯಮಾವಳಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೆ, ಚಿತ್ರಮಂದಿರಗಳಲ್ಲಿ ಪ್ರಸಾರ ಆಗುವ ಸಾಕ್ಷ್ಯಚಿತ್ರ ಅಥವಾ ಸಿನಿಮಾಗಳ ಮಧ್ಯೆ ಈ ಗೀತೆ ಪ್ರಸಾರವಾದರೆ ಪ್ರೇಕ್ಷಕರು ಎದ್ದುನಿಲ್ಲುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.